Breaking News

ನಿದ್ರಾವಸ್ಥೆಗೆ ಜಾರಿದ ಅಧಿಕಾರಿಗಳು : ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಂಡ ಹೆಬ್ಬಾಳ್ಕರ

Spread the love

ನಿದ್ರಾವಸ್ಥೆಗೆ ಜಾರಿದ ಅಧಿಕಾರಿಗಳು : ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಂಡ ಹೆಬ್ಬಾಳ್ಕರ

ಯುವ ಭಾರತ ಸುದ್ದಿ ಬೆಳಗಾವಿ :

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ತಮ್ಮ ಚುನಾವಣಾ ಪ್ರಚಾರಕ್ಕೆ ಚಿಕ್ಕ ಚಿಕ್ಕ ಮಕ್ಕಳನ್ನು ಕರೆದುಕೊಂಡು ಹೋಗಿ ಮನೆ ಮನೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ನಿದ್ರಾವಸ್ಥೆಗೆ ಜಾರಿದ್ದಾರೆ !

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಮರಿಕಟ್ಟಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಅವರು ಶಾಲೆಗೆ ಹೋಗುವ ಮಕ್ಕಳನ್ನು ಕರೆತಂದು ಭರ್ಜರಿ ಚುನಾವಣಾ ಪ್ರಚಾರ ಮಾಡಿಕೊಂಡಿದ್ದಾರೆ. ಏನು ಅರಿಯದ ಮಕ್ಕಳು ಹೆಬ್ಬಾಳಕರ ಮಾತಿಗೆ ತಲೆ ಆಡಿಸಿ ಮನೆ ಮನೆಗೆ ಹೋಗಿ ಕರಪತ್ರ ವಿತರಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಟೋಪಿ ಹಾಗೂ ಶಾಲು ಧರಿಸಿರುವ ಮಕ್ಕಳ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಮಾಣದಲ್ಲಿ ವೈರಲ್ ಆಗಿದೆ.

ಯಾವ ಅಭ್ಯರ್ಥಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಾರೆ ಎಂಬ ಬಗ್ಗೆ ಸ್ಥಳದಲ್ಲೇ ಸ್ವತಃ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆ. ಆದರೆ ಹೆಬ್ಬಾಳಕರ ಅವರ ಜೊತೆಗೆ ಹೋಗಿರುವ ಅಧಿಕಾರಿಗಳನ್ನು ಸಹಾ ಅವರು ತಮ್ಮ ಬುಟ್ಟಿಗೆ ಹಾಕಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಹೆಬ್ಬಾಳಕರ ಆಡಿದ್ದೆ ಆಟ ಎಂಬ ಪರಿಸ್ಥಿತಿ ಚುನಾವಣಾ ಸಂದರ್ಭದಲ್ಲಿಯೂ ನಿರ್ಮಾಣವಾಗಿದೆ.

ದೇವಸ್ಥಾನದಲ್ಲೇ ಅಬ್ಬರದ ಪ್ರಚಾರ ನಡೆಸಿದ ಹೆಬ್ಬಾಳಕರ :
ಇದರ ಜೊತೆ ದೇವಸ್ಥಾನಗಳ ಆವರಣಗಳನ್ನು ಚುನಾವಣಾ ಪ್ರಚಾರಕ್ಕೆ ಹೆಬ್ಬಾಳ್ಕರ್ ಬಳಕೆ ಮಾಡಿಕೊಂಡಿದ್ದಾರೆ. ಮರಿಕಟ್ಟಿ ಗ್ರಾಮದ ಲಕ್ಷ್ಮೀ ದೇವಿ ಮಂದಿರದಲ್ಲಿ ಜನರನ್ನು ಸೇರಿಸಿರುವ ಅವರು, ಬುಧವಾರ ಮಧ್ಯಾಹ್ನ 12:30 ಕ್ಕೆ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ದೇವಸ್ಥಾನಗಳನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳುವಂತಿಲ್ಲ ಎಂಬ ನಿಯಮವನ್ನು ಅವರು ನಿರ್ದಾಕ್ಷಿಣ್ಯವಾಗಿ ಗಾಳಿಗೆ ತೂರಿದ್ದಾರೆ.

ಶಿಸ್ತಿನ ಕ್ರಮ ಕಾಗದದಲ್ಲಿ ಮಾತ್ರ :
ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದೆಂದು ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರು ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡುತ್ತಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ ನೀಡಿದೆ. ಮಕ್ಕಳನ್ನು ಬಳಕೆ ಮಾಡಿಕೊಳ್ಳುವುದು ತಡೆಯಲು ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಭಾರತ ಸರ್ಕಾರ ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿಸೆಂಬರ್ 11ರಂದು ಒಪ್ಪಿ ಅನುಮೋದಿಸಿದೆ. ಇದರ ಅನ್ವಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಲಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

3 × three =