ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ.ಇಬ್ರಾಹಿಂ

ಬೆಂಗಳೂರು:
ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ (ಮೇ 24) ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ ಎಂದು ವರದಿಯಾಗಿದೆ.
ರಾಜೀನಾಮೆ ಸಲ್ಲಿಸಿ ಬಳಿಕ ದೇವೇಗೌಡರ ನಿವಾಸದ ಮುಂದೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಂ. ಇಬ್ರಾಹಿಂ, ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆಯನ್ನು ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಬಿಜೆಪಿ ವಿರೋಧಿ ಅಲೆ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೂ ನಾವು ರಾಜ್ಯದಲ್ಲಿ 60 ಲಕ್ಷ ಮತಗಳನ್ನು ಪಡೆದಿದ್ದೇವೆ. ಮುಂದಿನ ತಾಪಂ, ಜಿಪಂ ಹಾಗೂ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತೇವೆ ಎಂದರು.
ಕಾಂಗ್ರೆಸ್ನಲ್ಲಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಇಬ್ರಾಹಿಂ, ಗೌರವ ಇಲ್ಲದ ಕಡೆ ಹೋಗಲ್ಲ ಎಂದರು. ನೂತನ ಮುಖ್ಯಮಂತ್ರಿಗೆ ಒಳ್ಳೆಯದಾಗಲಿ, ಅವರು ಕೊಟ್ಟ ಭರವಸೆ ಈಡೇರಿಸಲಿ ಎಂದರು.
ಕಳೆದ ವರ್ಷ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
YuvaBharataha Latest Kannada News