ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ- ಕರ್ನಾಟಕ ರಾಜ್ಯ ಉಪ್ಪಾರ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಮನವಿ!
ಗೋಕಾಕ: ಕಾಂಗ್ರೆಸ್ ಪಕ್ಷದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಿಂದಾಗಿ ನೂತನ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಂಘಟಿತಗೊಳ್ಳಲಿರುವ ನೂತನ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ಭಗೀರಥ ಉಪ್ಪಾರ ಸಮಾಜದ ರಾಜ್ಯಾಧ್ಯಕ್ಷ, ಎಂ.ಎಸ್.ಐ.ಎಲ್. ಅಧ್ಯಕ್ಷರೂ ಆಗಿರುವ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನೀಡುವಂತೆ ಕರ್ನಾಟಕ ರಾಜ್ಯ ಉಪ್ಪಾರ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ.

ಗೋಕಾಕ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಸಮಾಜ ಮುಖಂಡರು.
ಗುರುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉಪ್ಪಾರ ಸಮಾಜಕ್ಕೆ ಸೂಕ್ತ ಮೀಸಲಾತಿ ಒದಗಿಸುವುದು, ಆರ್ಥಿಕ ಮತ್ತು ಶೈಕ್ಷಣಿಕ ರಂಗಗಳಲ್ಲಿ ಹಿಂದುಳಿದಿರುವ ಉಪ್ಪಾರ ಸಮಾಜದ ಶ್ರೇಯಸ್ಸಿಗಾಗಿ ಸರ್ಕಾರದ ಮಟ್ಟದಲ್ಲಿ ಜವಾಬ್ದಾರಿಯುತ ಕಾರ್ಯ ನಿರ್ವಹಿಸಲು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಕ್ಯಾಬೆನೆಟ್ ದರ್ಜೆಯ ಸಚಿವ ಸ್ಥಾನ ಒದಗಿಸಬೇಕಾದ ಅವಶ್ಯಕತೆ ಇದೆ ಎಂದರು.
ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಜಿ.ಎಸ್.ಉಪ್ಪಾರ ಮತ್ತು ತಾಲ್ಲೂಕು ಘಟಕ ಅಧ್ಯಕ್ಷ ಶಿವಪುತ್ರಪ್ಪ ಜಕಬಾಳ ಹಾಗೂ ಮುಖಂಡ ಬಸವರಾಜ ಖಾನಪ್ಪನವರ ಮಾತನಾಡಿ, ರಾಜ್ಯಾದ್ಯಂತ ಸುಮಾರು ೩೦-೩೫ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಪ್ರಾಭಲ್ಯ ಮತದಾರರ ಸಂಖ್ಯೆಯನ್ನು ಹೊಂದಿರುವ ಉಪ್ಪಾರ ಸಮಾಜಕ್ಕೆ ಜನಸಂಖ್ಯೆ ಅನುಪಾತಕ್ಕೆ ಅನುಗುಣವಾಗಿ ಪ್ರಾತಿನಿಧ್ಯ ಒದಗಿಸಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೊದಲಾದ ರಾಜಕೀಯ ಪಕ್ಷಗಳು ಆದ್ಯತೆ ನೀಡುವಂತೆ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪ್ಪಾರ ಸಮಾಜದ ಗೋಕಾಕ ತಾಲ್ಲೂಕು ಘಟಕದ ಉಪಾಧ್ಯಕ್ಷ ವಕೀಲ ಕುಶಾಲ ಗುಡೆನ್ನವರ, ಮುಖಂಡರಾದ ಮಾಯಪ್ಪ ತಹಶೀಲ್ದಾರ, ರೇವಪ್ಪ ದುರದುಂಡಿ, ಲಕ್ಕಪ್ಪ ನಂದಿ, ಸಿದ್ಧಾರೂಢ ದಾಸಪ್ಪನವರ, ಸೋಮು ತೋಳಿನವರ, ಡಿ.ಪಿ.ಮೇಲ್ಮಟ್ಟಿ, ನಿಂಗಪ್ಪ ಬ್ಯಾಗಿ, ಸಂಜೀವ ಸನದಿ, ಪ್ರಶಾಂತ ಬಿಲಕಾರ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
YuvaBharataha Latest Kannada News