ಮಾದಕವಸ್ತು ಮಾರಾಟ-ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ದೊಡ್ಡ ಜಿಲ್ಲೆ ಮಾತ್ರವಲ್ಲದೇ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವುದರಿಂದ ಮಾದಕವಸ್ತುಗಳ ಮಾರಾಟ, ಸಾಗಾಣಿಕೆ ಹಾಗೂ ಸೇವನೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಮಾದಕವಸ್ತುಗಳ ಮಾರಾಟ-ಸಾಗಾಣಿಕೆ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ(ಮಾ.4) ನಡೆದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕವಸ್ತುಗಳ ತಡೆ ನಿಟ್ಟಿನಲ್ಲಿ ಕೃಷಿ, ಅರಣ್ಯ, ಆರೋಗ್ಯ, ಪೊಲೀಸ್ ಇಲಾಖೆಯ ಪಾತ್ರ ಬಹಳ ಪ್ರಮುಖವಾಗಿರುತ್ತದೆ. ಈ ಇಲಾಖೆಯ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡಬೇಕು. ಎಲ್ಲೆಡೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.
ಪೊಲೀಸ್ ಇಲಾಖೆಯ ವತಿಯಿಂದ ಮಾದಕವಸ್ತು ಸಾಗಾಣಿಕೆ, ಮಾರಾಟ ತಡೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ. ಇದಲ್ಲದೇ ಗಾಂಜಾ ಬೆಳೆ ಪತ್ತೆ, ಗಾಂಜಾ ಮತ್ತಿತರ ಅಮಲು ಪದಾರ್ಥಗಳ ಸಾಗಾಣಿಕೆ ಪತ್ತೆ ಮಾಡಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಮಾದಕವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ಜಾಗೃತಿ ಮಾಡಿಸಬೇಕು.
ವಸತಿನಿಲಯಗಳಲ್ಲಿ ತಪಾಸಣೆ ನಡೆಸಬೇಕು. ಹೆದ್ದಾರಿ ಪಕ್ಕದ ಡಾಬಾ, ಹೋಟೆಲ್ ಗಳ ಮೇಲೆ ನಿಗಾ ವಹಿಸಬೇಕು.
ಹೊಲಗದ್ದೆಗಳಲ್ಲಿ ಗಾಂಜಾ ಬೆಳೆ ಬಗ್ಗೆ ಮಾಹಿತಿಯನ್ನು ಕಲೆಹಾಕಬೇಕು.
ವೈದ್ಯರ ಚೀಟಿ ಇಲ್ಲದೇ ಯಾವುದೇ ತರಹದ ಔಷಧಿ ಮಾರಾಟ ಮಾಡದಂತೆ ನಿಗಾ ವಹಿಸಬೇಕು.
ಮಾದಕವಸ್ತುಗಳ ಸೇವನೆಯಿಂದ ಯುವಸಮುದಾಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದರು.
ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, “ಮಾದಕವಸ್ತು ಸಾಗಾಣಿಕೆ, ಮಾರಾಟ ತಡೆಯುವುದು ಕೇವಲ ಪೊಲೀಸ್ ಇಲಾಖೆಯ ಕೆಲಸ ಎಂದುಕೊಳ್ಳಬಾರದು. ಅಬಕಾರಿ, ಅರಣ್ಯ, ಕೃಷಿ, ಆರೋಗ್ಯ ಮತ್ತಿತರ ಇಲಾಖೆಗಳು ಕೂಡ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಜತೆ ಕೈಜೋಡಿಸಬೇಕು” ಎಂದರು.
ಮಾದಕವಸ್ತುಗಳ ಬಗ್ಗೆ ಯಾವುದೇ ಮಾಹಿತಿ ದೊರೆತರೂ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.
ಡಿಎಫ್ಓ ಹರ್ಷಭಾನು ಸೇರಿದಂತೆ ಕೃಷಿ, ಅರಣ್ಯ, ಆರೋಗ್ಯ,ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
YuvaBharataha Latest Kannada News