ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ ಪದ್ಧತಿಯಲ್ಲಿ ಬದಲಾವಣೆ: ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ

ಯುವ ಭಾರತ ಸುದ್ದ್ದಿ ಬೆೆಂಗಳೂರು:
ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆಯಲ್ಲಿ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಮರುಮೌಲ್ಯಮಾಪನ ಮಾಡಿದಾಗ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಅದನ್ನು ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
2023ರ ಮಾರ್ಚ್ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಿಂದಲೇ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಅದನ್ನು ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.
ಈಗ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
YuvaBharataha Latest Kannada News